
ಪೊಲೀಸ್ ಅಧಿಕಾರಿಯ ಲಂಚ ಸ್ವೀಕಾರ: ವಿಚಾರಣಾ ನ್ಯಾಯಾಲಯದ ಶಿಕ್ಷೆಯನ್ನು ಖಾಯಂಗೊಳಿಸಿದ ಕರ್ನಾಟಕ ಹೈಕೋರ್ಟ್
ಪೊಲೀಸ್ ಅಧಿಕಾರಿಯ ಲಂಚ ಸ್ವೀಕಾರ: ವಿಚಾರಣಾ ನ್ಯಾಯಾಲಯದ ಶಿಕ್ಷೆಯನ್ನು ಖಾಯಂಗೊಳಿಸಿದ ಕರ್ನಾಟಕ ಹೈಕೋರ್ಟ್
ಬಾಗಲಗುಂಟೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಎಂ ಕೆ ಮಂಜಣ್ಣ ಅವರ ವಿರುದ್ಧ ರೂ. 10,000 ಲಂಚ ಪಡೆದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ಅವರ ಶಿಕ್ಷೆಯನ್ನು ಖಾಯಂಗೊಳಿಸಿದೆ.
ವಿಶೇಷ ನ್ಯಾಯಾಲಯ ನನಗೆ ವಿಧಿಸಿರುವ ಶಿಕ್ಷೆಯನ್ನು ರದ್ದುಪಡಿಸಬೇಕು ಎಂದು ಕೋರಿ ಎಂ ಕೆ ಮಂಜಣ್ಣ ಅವರು ಕರ್ನಾಟಕ ಹೈಕೋರ್ಟ್ ಮುಂದೆ ಕ್ರಿಮಿನಲ್ ಮೇಲ್ ಮನವಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರಿದ್ದ ಏಕ ಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.
ಪೊಲೀಸ್ ಅಧಿಕಾರಿಯಾಗಿದ್ದ ಮಂಜಣ್ಣ ಅವರಿಗೆ ವಿಚಾರಣಾ ನ್ಯಾಯಾಲಯ ನಾಲ್ಕು ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ತೆರುವಂತೆ ಆದೇಶ ನೀಡಿತ್ತು.
ಭ್ರಷ್ಟಾಚಾರ ಅಪರಾಧ ಪ್ರಕರಣಗಳಲ್ಲಿ ಮುಖ್ಯವಾಗಿ ಹಣದ ಬೇಡಿಕೆ ಇಟ್ಟಿರುವುದು ಮತ್ತು ಹಣ ಪಡೆಯುತ್ತಿರುವುದು ಸಾಬೀತಾಗಬೇಕು. ಸದ್ರಿ ಈ ಪ್ರಕರಣದಲ್ಲಿ ಅವೆರಡು ದೃಢಪಟ್ಟಿವೆ. ಹೀಗಾಗಿ ವಿಚಾರಣಾ ನ್ಯಾಯಾಲಯದ ಆದೇಶವನ್ನು ಖಾಯಂಗೊಳಿಸಲಾಗುತ್ತಿದೆ ಎಂದು ನ್ಯಾಯ ಪೀಠ ತೀರ್ಪಿನಲ್ಲಿ ಹೇಳಿದೆ.
ಪ್ರಕರಣದ ವಿವರ
ಕ್ರಿಮಿನಲ್ ಆರೋಪದ ಪ್ರಕರಣ ಒಂದನ್ನು ಮುಚ್ಚಿಹಾಕಲು ಬಾಗಲಗುಂಟೆಯ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ 10,000 ರೂ. ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳ ಕಾರ್ಯಾಚರಣೆಯ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು. ಈ ಪ್ರಕರಣದ ಬಗ್ಗೆ ಪೊಲೀಸರು ಆರೋಪಪಟ್ಟಿಯನ್ನೂ ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯ ಆರೋಪಿಗೆ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ನಾಲ್ಕು ವರ್ಷಗಳ ಜೈಲು ಶಿಕ್ಷೆ ಮತ್ತು ಐವತ್ತು ಸಾವಿರ ರೂಪಾಯಿ ದಂಡ ವಿಧಿಸಿತ್ತು.