
ಆಡಳಿತದಲ್ಲಿ ಕನ್ನಡ ಬಳಕೆ ಕಡ್ಡಾಯ: 'ಭಾಷೆ' ಬಾರದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮದ ಎಚ್ಚರಿಕೆ- ಸುತ್ತೋಲೆ ಪರಿಣಾಮಕಾರಿ ಜಾರಿಗೆ ಅಭಿವೃದ್ಧಿ ಪ್ರಾಧಿಕಾರ ಆಗ್ರಹ
ಆಡಳಿತದಲ್ಲಿ ಕನ್ನಡ ಬಳಕೆ ಕಡ್ಡಾಯ: 'ಭಾಷೆ' ಬಾರದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮದ ಎಚ್ಚರಿಕೆ- ಸುತ್ತೋಲೆ ಪರಿಣಾಮಕಾರಿ ಜಾರಿಗೆ ಅಭಿವೃದ್ಧಿ ಪ್ರಾಧಿಕಾರ ಆಗ್ರಹ
ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸಲು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತೊಮ್ಮೆ ಸ್ಪಷ್ಟ ಆದೇಶ ಹೊರಡಿಸಿದ್ದಾರೆ.
ಈ ಸೂಚನೆಯನ್ನು ಪಾಲಿಸದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ವೈಯಕ್ತಿಕವಾಗಿ ಶಿಸ್ತುಕ್ರಮ ಖಚಿತ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಎಲ್ಲ ಇಲಾಖಾ ಮುಖ್ಯಸ್ಥರು, ಡಿಸಿ, ಸಿಇಓ ಗಳಿಗೆ ಸುತ್ತೋಲೆ ರವಾನಿಸಲಾಗಿದೆ.
ಕೇಂದ್ರ ಸರ್ಕಾರ ಹೊರ ರಾಜ್ಯ ಮತ್ತು ನ್ಯಾಯಾಲಯಗಳ ಪತ್ರ ಹೊರತುಪಡಿಸಿ ಉಳಿದ ಎಲ್ಲ ವ್ಯವಹಾರಗಳನ್ನು ಕನ್ನಡದಲ್ಲೇ ನಡೆಸುವಂತೆ ನಿರ್ದೇಶನ ನೀಡಿದೆ. ರಾಜ್ಯ ಭಾಷಾ ಅಧಿನಿಯಮ 1969ರಂತೆ ಆಡಳಿತದಲ್ಲಿ ಕನ್ನಡ ಬಳಕೆ ಪೂರ್ಣಪ್ರಮಾಣದಲ್ಲಿ ಅನುಷ್ಟಾನ ಆಗಬೇಕು ಎಂದು ಸೂಚಿಸಲಾಗಿದೆ.
ಸರ್ಕಾರಿ ಕಚೇರಿಗಳ ನಾಮಫಲಕ ಕನ್ನಡದಲ್ಲೇ ಇರಬೇಕು. ವಿಧಾನಮಂಡಲ ಕಾರ್ಯಕಲಾಪಗಳು, ಪತ್ರ ವ್ಯವಹಾರ, ಗಮನ ಸೆಳೆಯುವ ಸೂಚನೆಗಳನ್ನು ಕಡ್ಡಾಯವಾಗಿ ಕನ್ನಡದಲ್ಲೇ ಸಲ್ಲಿಸಬೇಕು. ನೇಮಕಾತಿ, ವರ್ಗಾವಣೆ, ರಜೆ ಮಂಜೂರು ಸೇರಿ ಎಲ್ಲ ಸರ್ಕಾರಿ ಅದೇಶಗಳನ್ನು ಕನ್ನಡದಲ್ಲೇ ಹೊರಡಿಸಬೇಕು.
ಸಭಾ ಸೂಚನೆ, ಕಾರ್ಯಸೂಚಿ, ಸಂಕ್ಷಿಪ್ತ ಟಿಪ್ಪಣಿ ಮತ್ತು ನಡಾವಳಿಗಳನ್ನು ಕನ್ನಡದಲ್ಲಿ ತಯಾರಿಸಬೇಕು. ಕಚೇರಿಗಳಲ್ಲಿ ಆಂತರಿಕ ಪತ್ರ ವ್ಯವಹಾರಗಳು, ಕಡತದ ಟಿಪ್ಪಣಿ ಕನ್ನಡದಲ್ಲೇ ಇರಬೇಕು ಎಂದು ನಿರ್ದೇಶನ ನೀಡಿದ್ದಾರೆ.
ಆಡಳಿತ ವ್ಯವಸ್ಥೆಯಲ್ಲಿ ಕನ್ನಡಕ್ಕೆ ಆದ್ಯತೆ ನೀಡದ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ವೈಯಕ್ತಿಕವಾಗಿ ಶಿಸ್ತುಕ್ರಮ ಜರುಗಿಸುವುದಾಗಿ ನೀಡಿರುವ ಈ ಎಚ್ಚರಿಕೆ ಅತ್ಯಂತ ಪರಿಣಾಮಕಾರಿಯಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಸಂತಸ ವ್ಯಕ್ತಪಡಿಸಿದ್ದಾರೆ.
ಅಧಿಕಾರಿ ವರ್ಗ ಕನಿಷ್ಟ ಈಗಲಾದರೂ ಎಚ್ಚೆತ್ತುಕೊಂಡು ಮುತುವರ್ಜಿಯಿಂದ ಕನ್ನಡದ ಬಳಕೆಗೆ ಮುಂದಾಗಬೇಕು ಎಂದು ಅವರು ಒತ್ತಾಯಿಸಿದ್ಧಾರೆ.
ಆಡಳಿತದಲ್ಲಿ ಭಾಷಾ ನೀತಿಗೆ ಸಂಬಂಧಿಸಿದಂತೆ ಸರ್ಕಾರಿ ಆದೇಶದಲ್ಲಿನ ಸೂಚನೆಗಳನ್ನು ಎಲ್ಲ ಇಲಾಖೆ, ನಿಗಮ, ಮಂಡಳಿ, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾನಿಲಯ, ಹಾಗೂ ಅನುದಾನಿತ ಸಂಸ್ಥೆಗಳ ಸಿಬ್ಬಂದಿ ವರ್ಗ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕಾಗಿದೆ.