
ಗುತ್ತಿಗೆ ನೌಕರರ ಖಾಯಂ- ಮಹಾನಗರ ಪಾಲಿಕೆಗೆ 60 ದಿನಗಳ ಗಡುವು ನೀಡಿದ ಕರ್ನಾಟಕ ಹೈಕೋರ್ಟ್
ಗುತ್ತಿಗೆ ನೌಕರರ ಖಾಯಂ- ಮಹಾನಗರ ಪಾಲಿಕೆಗೆ 60 ದಿನಗಳ ಗಡುವು ನೀಡಿದ ಕರ್ನಾಟಕ ಹೈಕೋರ್ಟ್
ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದ ನೌಕರರನ್ನು ಖಾಯಂಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದ್ದು, ಖಾಯಂ ಮಾಡಲು ಪಾಲಿಕೆಗೆ 60 ದಿನಗಳ ಗಡುವು ನೀಡಿದೆ.
ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಹೊರಡಿಸಿದೆ.
ಮಂಗಳೂರು ಮಹಾನಗರ ಪಾಲಿಕೆಯ ನೀರು ಸರಬರಾಜು ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಭಗವಾನ್ ದಾಸ್ ಮತ್ತು ಇತರ ಒಟ್ಟು 16 ಕಾರ್ಮಿಕರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಒಳಪಡಿಸಿದ ನ್ಯಾಯಪೀಠ ಈ ಮಹತ್ವದ ತೀರ್ಪು ನೀಡಿದೆ.
ಮಂಗಳೂರು ಮಹಾನಗರ ಪಾಲಿಕೆಯಲ್ಲಿ ನೀರು ಸರಬರಾಜು ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ 16 ಕಾರ್ಮಿಕರ ಸೇವೆ ಖಾಯಂಗೊಳಿಸಬೇಕು ಎಂದು ಪಾಲಿಕೆಗೆ ನ್ಯಾಯಪೀಠ ನಿರ್ದೇಶನ ನೀಡಿತು.
ನೇರ ನೇಮಕಾತಿಯನ್ನು ತಪ್ಪಿಸುವುದಕ್ಕಾಗಿ ಹೊರಗುತ್ತಿಗೆ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂಬ ಸುಪ್ರೀಂ ಕೋರ್ಟ್ ನೀಡಿರುವ ವಿವಿಧ ಆದೇಶಗಳನ್ನು ಉಲ್ಲೇಖಿಸಿದ ನ್ಯಾಯಪೀಠ, ಅರ್ಜಿದಾರರಾದ ಗುತ್ತಿಗೆ ನೌಕರರನ್ನು ಖಾಯಂಗೊಳಿಸುವ ಮನವಿಯನ್ನು ತಿರಸ್ಕರಿಸಿ 2025ರ ಜನವರಿ 31ರಂದು ಜಿಲ್ಲಾಧಿಕಾರಿ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿದೆ.
10 ವರ್ಷಗಳ ಪೂರ್ಣಗೊಂಡ ದಿನಾಂಕದಿಂದ ಖಾಯಂಗೊಳಿಸಿ ಆದೇಶ ಹೊರಡಿಸುವಂತೆ ಜಿಲ್ಲಾದಿಕಾರಿಗೆ ನಿರ್ದೇಶನ ನೀಡಿದೆ.
ಪಾಲಿಕೆಯಲ್ಲಿ ಖಾಲಿ ಹುದ್ದೆಗಳಿದ್ದರೂ ಗುತ್ತಿಗೆ ಆಧಾರದಲ್ಲಿ ಸೇವೆ ಮುಂದುವರಿಸಲಾಗಿತ್ತು. ಗುತ್ತಿಗೆ ಕಾರ್ಮಿಕರ (ನಿಯಂತ್ರಣ ಮತ್ತು ರದ್ದತಿ) ಕಾಯಿದೆ ಸೆಕ್ಷನ್ 10ರ ಅಡಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ನೀರು ಸರಬರಾಜು ವಿಭಾಗದಲ್ಲಿ ಗುತ್ತಿಗೆ ಕಾರ್ಮಿಕರ ಸೇವೆ ರದ್ದುಗೊಳಿಸಿರುವುದಾಗಿ ರಾಜ್ಯ ಸರ್ಕಾರ ಆದೇಶಿಸಿತ್ತು.
ಆದರೂ, ಅರ್ಜಿದಾರರು 2006ರ ಬಳಿಕವೂ ಗುತ್ತಿಗೆ ನೌಕರರಾಗಿ ಸೇವೆ ಮುಂದುವರಿಸಿದ್ದಾರೆ. 2006ರ ಬಳಿಕ ಗುತ್ತಿಗೆ ಸೇವೆಯಿಂದ ಗುತ್ತಿಗೆ ನೌಕರರ ಸೇವೆಯನ್ನು 2016ರ ರದ್ದುಪಡಿಸಿರುವ ಹೊರತಾಗಿಯೂ ಪಾಲಿಕೆಯಲ್ಲಿ ಅರ್ಜಿದಾರರು ಗುತ್ತಿಗೆ ಕಾರ್ಮಿಕರಾಗಿ ನಿರಂತರ ಸೇವೆ ಸಲ್ಲಿಸುತ್ತಿದ್ದು, ಖಾಯಂಗೊಳಿಸಬೇಕು ಎಂದು ಮನವಿ ಮಾಡಿದ್ದರು.