
ನ್ಯಾಯಾಲಯಕ್ಕೆ ಪಿಎಸ್ಐ ಆರೋಪ ಪಟ್ಟಿ ಸಲ್ಲಿಸಿದರೂ ಮಾನ್ಯತೆ ಇದೆ: ಕರ್ನಾಟಕ ಹೈಕೋರ್ಟ್
ನ್ಯಾಯಾಲಯಕ್ಕೆ ಪಿಎಸ್ಐ ಆರೋಪ ಪಟ್ಟಿ ಸಲ್ಲಿಸಿದರೂ ಮಾನ್ಯತೆ ಇದೆ: ಕರ್ನಾಟಕ ಹೈಕೋರ್ಟ್
ಅಪರಾಧ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸುವ ಅಧಿಕಾರ ಪೊಲೀಸ್ ಸಬ್ ಇನ್ಸ್ಪೆಕ್ಟರ್(ಪಿಎಸ್ಐ) ಶ್ರೇಣಿಯ ಅಧಿಕಾರಿಗಳಿಗೆ ಇದೆ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.
ತಮ್ಮ ಕುಟುಂಬ ಸದಸ್ಯರ ಸಾಮೂಹಿಕ ಆತ್ಮಹತ್ಯೆ ಪ್ರಕರಣದಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪಿತರಾಗಿದ್ದ ಆರೋಪಿಗಳು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ತೀರ್ಪು ನೀಡಿದೆ.
ಅರ್ಜಿದಾರರ ಪರ ವಾದ ಮಂಡಿಸಿದ್ದ ವಕೀಲರು, ಚಾರ್ಜ್ಶೀಟ್ ಸಲ್ಲಿಕೆಯಲ್ಲಿ ಲೋಪವಾಗಿದೆ ಎಂದು ಹೇಳಿದ್ದರು. ಫಿರ್ಯಾದಿಯಾಗಿದ್ದ ಇನ್ಸ್ಪೆಕ್ಟರ್ ನೀಡಿದ್ದ ದೂರಿನಂತೆ ಎಫ್ಐಆರ್ ದಾಖಲಿಸಲಾಗಿದ್ದು, ಕೆಳ ಹಂತದ ಅಧಿಕಾರಿಯೊಬ್ಬರು ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಹಾಗಾಗಿ, ಅಂತಿಮ ವರದಿ ಸಲ್ಲಿಸುವ ಅಧಿಕಾರ ಇರುವುದು ಇನ್ಸ್ಪೆಕ್ಟರ್ಗೆ ಮಾತ್ರ. ಪಿಎಸ್ಐಗೆ ಚಾರ್ಜ್ಶೀಟ್ ಸಲ್ಲಿಸಲು ಯಾವುದೇ ಅಧಿಕಾರ ಇಲ್ಲ ಎಂದು ವಾದಿಸಿದ್ದರು.
ಅರ್ಜಿದಾರರಾದ ಆರೋಪಿಗಳು ತಮ್ಮ ಕುಟುಂಬದ ಸದಸ್ಯರಿಗೆ ಆತ್ಮಹತ್ಯೆ ಪ್ರಚೋದನೆ ನೀಡಿರುವುದು ಮೃತರು ಬರೆದಿದ್ದ ಮರಣಪತ್ರದಿಂದ ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. ಕುಟುಂಬದ ಸದಸ್ಯರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣವನ್ನು ಸಾಮಾನ್ಯ ಆತ್ಮಹತ್ಯೆ ಪ್ರಕರಣ ಎಂದು ಪರಿಗಣಿಸಲಾಗದು ಎಂದು ನ್ಯಾಯಪೀಠ ಹೇಳಿದೆ.
ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ಕೂಡ ಪೊಲೀಸ್ ಠಾಣೆಯ ಉಸ್ತುವಾರಿ ಆಗಿದ್ದು, ಅವರು ಸಲ್ಲಿಸಿದ್ದ ಆರೋಪಪಟ್ಟಿ ಕೂಡ ಮಾನ್ಯತೆ ಹೊಂದಿರುತ್ತದೆ. ಇದರಲ್ಲಿ ಯಾವುದೇ ಲೋಪವಾಗಿಲ್ಲ. ಹಾಗಾಗಿ, ಅರ್ಜಿದಾರರಿಗೆ ಜಾಮೀನು ನೀಡಲಾಗದು ಎಂದು ನ್ಯಾಯಪೀಠ ಹೇಳಿದ್ದರು.
ಪ್ರಕರಣದ ಹಿನ್ನೆಲೆ
ಡೆತ್ ನೋಟ್ ಬರೆದಿಟ್ಟು ಇಡೀ ಕುಟುಂಬದ ಸದಸ್ಯರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ನೀಡಿದ್ದ ಲಿಖಿತ ದೂರನ್ನು ಆಧರಿಸಿ ಬ್ಯಾಡರಹಳ್ಳಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು.
ಎಫ್ಐಆರ್ ಆಧಾರದಲ್ಲಿ ಆರೋಪಿಗಳನ್ನು ಬಂಧಿಸಲಾಗಿತ್ತು. ತನಿಖೆ ಪೂರ್ಣಗೊಂಡ ನಂತರ ಪಿಎಸ್ಐ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಇನ್ಸ್ಪೆಕ್ಟರ್ ದೂರು ನೀಡಿದ್ದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯ ಆಡಳಿತ ಹೊಂದಿರುವ ಇನ್ಸ್ಪೆಕ್ಟರ್ಗೆ ಮಾತ್ರ ದೋಷಾರೋಪ ಪಟ್ಟಿ ಸಲ್ಲಿಸುವ ಅಧಿಕಾರ ಇದೆ. ಪಿಎಸ್ಐಗೆ ದೋಷಾರೋಪ ಪಟ್ಟಿ ಸಲ್ಲಿಸಲು ಅಧಿಕಾರ ಇಲ್ಲ ಎಂದು ಆರೋಪಿಗಳು ಹೈಕೋರ್ಟ್ನಲ್ಲಿ ವಾದಿಸಿದ್ದರು.
ಈ ವಾದವನ್ನು ತಿರಸ್ಕರಿಸಿದ ನ್ಯಾಯಪೀಠ, ಪೊಲೀಸ್ ಮಾರ್ಗಸೂಚಿಯಲ್ಲಿ ಪಿಎಸ್ಐಗೂ ದೋಷಾರೋಪ ಪಟ್ಟಿ ಸಲ್ಲಿಸುವ ಅಧಿಕಾರವಿದೆ. ಪಿಎಸ್ಐ ಕೂಡ ಠಾಣೆಯ ಉಸ್ತುವಾರಿಯಾಗಿದ್ದಾರೆ. ಎಫ್ಐಆರ್ ದಾಖಲಿಸಿರುವ ಪಿಎಸ್ಐ ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸಿರುವುದು ಕಾನೂನಾತ್ಮಕವಾಗಿ ಸರಿಯಾಗಿಯೇ ಇದೆ ಎಂದು ಹೇಳಿದೆ.
ಪ್ರಕರಣ: ಪ್ರವೀಣ್ ಕುಮಾರ್ Vs ಕರ್ನಾಟಕ ರಾಜ್ಯ
ಕರ್ನಾಟಕ ಹೈಕೋರ್ಟ್ Crl P. 2807/2022 Dated 19-05-2022